ಬೆಂಗಳೂರು: Tulu Times l ಕರ್ನಾಟಕ ಕಾಂಗ್ರೆಸ್ನಲ್ಲಿ ಹಲವು ತಿಂಗಳುಗಳಿಂದ ನಡೆಯುತ್ತಿದ್ದ ಅಧಿಕಾರ ಹಂಚಿಕೆ ಗೊಂದಲಕ್ಕೆ ಮಹತ್ವದ ತಿರುವು ಸಿಕ್ಕಿರುವ ಸೂಚನೆಗಳು ಲಭ್ಯವಾಗಿವೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನ ತೊರೆಯಲು ತಾತ್ವಿಕವಾಗಿ ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ನವದೆಹಲಿಯಲ್ಲಿ ನಡೆದ ಮ್ಯಾರಥಾನ್ ಸಭೆಗಳ ಬಳಿಕ ಈ ಬೆಳವಣಿಗೆ ನಡೆದಿದ್ದು, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮುಖ ಆಕಾಂಕ್ಷಿಯಾಗಿದ್ದಾರೆ ಎನ್ನಲಾಗುತ್ತಿದೆ. ಆದರೆ ಮುಂದಿನ ಮುಖ್ಯಮಂತ್ರಿ ಯಾರು ಎಂಬುದರ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ. ಮೂಲಗಳ ಪ್ರಕಾರ, ಸಿದ್ದರಾಮಯ್ಯ ಅವರು ಮೇ 28ರಂದು ಮಧ್ಯಾಹ್ನ 2 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಲೋಕಭವನದಲ್ಲಿ ಭೇಟಿಯಾಗಲು ಸಮಯ ಕೋರಿದ್ದಾರೆ. ಇದರ ಜೊತೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಮುಂದಿನ ದಿನ ಕರೆದಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ದೀರ್ಘಕಾಲದ ಭಿನ್ನಾಭಿಪ್ರಾಯ ನಿವಾರಣೆಗೆ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಅಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ಬೆಂಬಲಿಗ ಶಾಸಕರೊಂದಿಗೆ ಚರ್ಚಿಸಿದ ಬಳಿಕ ಸ್ಥಾನ ತ್ಯಜಿಸಲು ಸಮ್ಮತಿಸಿದ್ದಾರೆ ಎಂದು ಮೂಲಗಳು ಹೇಳಿವೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಮುಖ್ಯಮಂತ್ರಿ ಸ್ಥಾನವನ್ನು ಎರಡೂವರೆ ವರ್ಷ ಹಂಚಿಕೊಳ್ಳುವ ಬಗ್ಗೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಒಪ್ಪಂದವಾಗಿತ್ತು ಎಂಬ ಮಾತು ರಾಜಕೀಯ ವಲಯದಲ್ಲಿ ಹರಿದಾಡುತ್ತಿತ್ತು. ಅದರಂತೆ ಕಳೆದ ನವೆಂಬರ್ನಲ್ಲೇ ಅಧಿಕಾರ ಬದಲಾವಣೆ ನಡೆಯಬೇಕಾಗಿತ್ತು. ಆದರೆ ಸಿದ್ದರಾಮಯ್ಯ ಅವರು ಸ್ಥಾನ ತೊರೆಯಲು ಮುಂದಾಗಿರಲಿಲ್ಲ.

ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರನ್ನು ಸೋಮವಾರ ದೆಹಲಿಗೆ ಕರೆಯಲಾಗಿತ್ತು. ಅಲ್ಲಿ ಮಲ್ಲಿಕಾರ್ಜುನ ಖರ್ಗೆ, ಕೆ. ಸಿ ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲ ಉಪಸ್ಥಿತಿಯಲ್ಲಿ ಹಲವು ಸುತ್ತಿನ ಮಾತುಕತೆಗಳು ನಡೆದವು. ಈ ವೇಳೆ ಸಿದ್ದರಾಮಯ್ಯ ಅವರಿಗೆ ರಾಷ್ಟ್ರೀಯ ರಾಜಕೀಯದಲ್ಲಿ ದೊಡ್ಡ ಪಾತ್ರ ವಹಿಸುವ ಅವಕಾಶದ ಕುರಿತು ಚರ್ಚೆಯಾಗಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯಸಭೆಗೆ ಕಳುಹಿಸುವ ಪ್ರಸ್ತಾಪವೂ ಚರ್ಚೆಯಲ್ಲಿತ್ತು ಎನ್ನಲಾಗಿದೆ.
ಸಿದ್ದರಾಮಯ್ಯ ಅವರು ಸುಮಾರು 100 ಕಾಂಗ್ರೆಸ್ ಶಾಸಕರ ಬೆಂಬಲ ಪತ್ರವನ್ನು ಹೈಕಮಾಂಡ್ಗೆ ತೋರಿಸಿ ತಮ್ಮ ಪ್ರಾಬಲ್ಯವನ್ನು ಸಾಬೀತುಪಡಿಸಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ಗೆ ಪ್ರಸ್ತುತ 224 ಸದಸ್ಯರ ವಿಧಾನಸಭೆಯಲ್ಲಿ 134 ಸ್ಥಾನಗಳಿವೆ. ಇನ್ನು ರಾಜಕೀಯ ವಲಯದಲ್ಲಿ ಡಿಕೆ ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಎಂಬ ಮಾತು ಕೇಳಿಬರುತ್ತಿದ್ದರೂ, ಕಾಂಗ್ರೆಸ್ ಹೈಕಮಾಂಡ್ ಹೊಸ ಮುಖವನ್ನು ಮುಂದಿರಿಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ.
ಈ ಪಟ್ಟಿಯಲ್ಲಿ ಕಂದಾಯ ಸಚಿವ ಕೃಷ್ಣಬೈರೇ ಗೌಡ ಹಾಗೂ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅವರ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ. ಇಬ್ಬರೂ ಸ್ವಚ್ಛ ಇಮೇಜ್ ಮತ್ತು ಆಡಳಿತ ಸಾಮರ್ಥ್ಯ ಹೊಂದಿರುವ ನಾಯಕರು ಎಂದು ಕಾಂಗ್ರೆಸ್ ವಲಯದಲ್ಲಿ ಚರ್ಚೆಯಾಗುತ್ತಿದೆ. ಇದೀಗ ಕರ್ನಾಟಕ ರಾಜಕೀಯದಲ್ಲಿ ಮುಂದಿನ ಕೆಲವು ದಿನಗಳು ಅತ್ಯಂತ ಮಹತ್ವ ಪಡೆದುಕೊಂಡಿದ್ದು, ಕಾಂಗ್ರೆಸ್ ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳುತ್ತದೆ ಎಂಬುದರತ್ತ ಎಲ್ಲರ ಗಮನವಿದೆ.
Significant development in Karnataka politics: Siddaramaiah agrees to step down as Chief Minister – ತುಳು ಟೈಮ್ಸ್
ಇದನ್ನೂ ಓದಿ : ಬಿರಿಯಾನಿಗೆ ಇನ್ಮುಂದೆ 500 ರೂ. : ಕರ್ನಾಟಕ ರಾಜ್ಯ ಹೋಟೆಲ್ ಸಂಘದಿಂದ ಎಚ್ಚರಿಕೆ
=====
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ : https://youtu.be/A4sa6ZYjODw?si=L5PczT3V6igLgeZ-











