ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳು ಮತ್ತೆ ಅರ್ಜಿ ಸಲ್ಲಿಸಬೇಕು: ಡಿ.ಕೆ. ಶಿವಕುಮಾರ್

ಬೆಂಗಳೂರು : Tulu Times l ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಹೊಸದಾಗಿ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ಅಧೀಕ್ಷಕರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಅರಣ್ಯ ಅಧಿಕಾರಿಗಳ ಸಭೆಯ ಬಳಿಕ ಮಾತನಾಡಿದ ಅವರು, ಯೋಜನೆಗಳ ಪಟ್ಟಿಯಲ್ಲಿ ಮೃತರು ಹಾಗೂ ಅನರ್ಹರು ಸೇರಿರುವುದು ಪತ್ತೆಯಾಗಿದ್ದು, ಇದರಿಂದ ಕೋಟ್ಯಂತರ ರೂಪಾಯಿ ದುರುಪಯೋಗವಾಗಿದೆ ಎಂದು ಹೇಳಿದರು.

ಮೃತರ ಖಾತೆಗಳಿಗೆ ₹100 ಕೋಟಿ ವರ್ಗಾವಣೆ; ಗೃಹಲಕ್ಷ್ಮಿ ಯೋಜನೆಯಡಿ ಸುಮಾರು ₹100 ಕೋಟಿ ಹಣ ಮೃತ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿದೆ ಎಂದು ತಿಳಿಸಿದ ಶಿವಕುಮಾರ್, ಕೆಲವರು ತಮ್ಮ ಮೊಬೈಲ್ ಸಂಖ್ಯೆಯ ಬದಲಿಗೆ ಇತರರ ಸಂಖ್ಯೆಯನ್ನು ನೀಡಿರುವುದೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದರು. ಯೋಜನೆಯನ್ನು ಯಾರಿಂದಲೂ ಕಸಿದುಕೊಳ್ಳುವುದಿಲ್ಲ. ಆದರೆ ಫಲಾನುಭವಿಗಳು ತಮ್ಮ ಮಾಹಿತಿಯನ್ನು ಮತ್ತೊಮ್ಮೆ ಸರಿಯಾಗಿ ಸಲ್ಲಿಸಬೇಕು. ಅರ್ಜಿಗಳನ್ನು ಮರುಪರಿಶೀಲಿಸಿ ನೈಜ ಫಲಾನುಭವಿಗಳನ್ನು ಗುರುತಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಗೃಹಜ್ಯೋತಿ ಯೋಜನೆಗೂ ಮರು ಅರ್ಜಿ ಕಡ್ಡಾಯ;

ರಾಜ್ಯದಲ್ಲಿ ಸುಮಾರು 1.64 ಕೋಟಿ ಫಲಾನುಭವಿಗಳು ಗೃಹಜ್ಯೋತಿ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ. ಆದರೆ ಒಂದೇ ಹೆಸರಿನಲ್ಲಿ ಹಲವು ವಿದ್ಯುತ್ ಮೀಟರ್‌ಗಳನ್ನು ನೋಂದಾಯಿಸಿರುವ ಪ್ರಕರಣಗಳು ಪತ್ತೆಯಾಗಿವೆ. ಕೆಲವರು ಅಂಗಡಿ ಹಾಗೂ ವಾಣಿಜ್ಯ ಉದ್ದೇಶಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಬಳಸುತ್ತಿದ್ದಾರೆ. ಹೆಚ್ಚುತ್ತಿರುವ ವಿದ್ಯುತ್ ವೆಚ್ಚದ ಹಿನ್ನೆಲೆಯಲ್ಲಿ ವ್ಯಾಪಾರ ಚಟುವಟಿಕೆಗಳಿಗೆ ಈ ಸೌಲಭ್ಯ ನೀಡಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಫಲಾನುಭವಿಗಳಿಗೆ ಗುರುತಿನ ಚೀಟಿ

ನೈಜ ಫಲಾನುಭವಿಗಳನ್ನು ಗುರುತಿಸಲು ಸರ್ಕಾರ ಗುರುತಿನ ಚೀಟಿಗಳನ್ನು ನೀಡುವ ಯೋಜನೆ ರೂಪಿಸುತ್ತಿದೆ. ಫಲಾನುಭವಿಗಳು ಮನೆ ಮಾಲೀಕರೇ ಅಥವಾ ಬಾಡಿಗೆದಾರರೇ, ಕರ್ನಾಟಕದ ನಿವಾಸಿಗಳೇ ಅಥವಾ ಹೊರರಾಜ್ಯದವರೇ ಎಂಬ ಮಾಹಿತಿಯನ್ನು ಸಂಗ್ರಹಿಸಲಾಗುವುದು.

ಭ್ರಷ್ಟಾಚಾರ ಮುಕ್ತ ಕರ್ನಾಟಕ ನಿರ್ಮಾಣವೇ ಸರ್ಕಾರದ ಗುರಿ ಎಂದು ಹೇಳಿದ ಶಿವಕುಮಾರ್, ಜಿಲ್ಲೆ ಹಾಗೂ ತಾಲ್ಲೂಕು ಕಚೇರಿಗಳಲ್ಲಿ ದೂರು ಸಲ್ಲಿಸಲು ವಿಶೇಷ ದೂರವಾಣಿ ಸಂಖ್ಯೆಯ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಲಾಗುವುದು ಎಂದರು. ಯಾವುದೇ ನಿಯಮಬಾಹಿರ ಆದೇಶ ಬಂದರೆ, ಅದು ಸಚಿವರಿಂದಾಗಲಿ, ಶಾಸಕರಿಂದಾಗಲಿ ಅಥವಾ ತಮ್ಮ ಕಚೇರಿಯಿಂದಾಗಲಿ ಪಾಲಿಸಬಾರದು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಿವಕುಮಾರ್ ತಿಳಿಸಿದರು. ಒಟ್ಟಾರೆ, ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳ ಮಾಹಿತಿಯನ್ನು ಮರು ಪರಿಶೀಲಿಸಿ, ನೈಜ ಅರ್ಹರಿಗೆ ಮಾತ್ರ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಳ್ಳಲು ಮುಂದಾಗಿದೆ.

Grihalakshmi, Grihaljyoti beneficiaries should re-apply: D.K. Shivakumar – ತುಳುಟೈಮ್ಸ್

ಇದನ್ನೂ ಓದಿ :ಖಾಲಿ ಹೊಟ್ಟೆಯಲ್ಲಿ ಗ್ರೀನ್ ಜ್ಯೂಸ್ ಕುಡಿಯುತ್ತೀರಾ? ಅಜೀರ್ಣ, ಹೊಟ್ಟೆ ಉಬ್ಬರದ ಸಮಸ್ಯೆ ಉಂಟಾಗಬಹುದು!

===

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್  ಮಾಡಿ :https://www.youtube.com/live/4pEuD7fDOuo?si=F6_sd4Y0JLTyi0PS

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 185

You cannot copy content of this page