Street Dogs : ನ್ಯಾಯಾಲಯದ ಆದೇಶದಂತೆ ಅಪಾಯಕಾರಿ ಹಾಗೂ ಆಕ್ರಮಣಕಾರಿ ಬೀದಿ ನಾಯಿಗಳ ಸಮಸ್ಯೆಗಳನ್ನು ತಡೆಗಟ್ಟಲು ಹಾಗೂ ಸೂಕ್ತ ಚಿಕಿತ್ಸೆಗೆ ಒಳಪಡಿಸಲು ಕ್ರಮ ಕೈಗೊಳ್ಳಲಾಗಿರುತ್ತದೆ. ಘನ ಸರ್ವೋಚ್ಛ ನ್ಯಾಯಾಲಯದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ಈ ಪ್ರಯುಕ್ತ ಬುಧವಾರ ಬೆಂಗಳೂರು ಉತ್ತರ ನಗರ ಪಾಲಿಕೆಯಲ್ಲಿ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿತ್ತು.
ಈ ಸಭೆಯಲ್ಲಿ ಬೀದಿ ನಾಯಿಗಳ ನಿಯಂತ್ರಣ, ಪ್ರಾಣಿಗಳ ಕಲ್ಯಾಣ ಹಾಗೂ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲಾಯಿತು. ಶಿಕ್ಷಣ ಸಂಸ್ಥೆಗಳನ್ನು ಪಟ್ಟಿ ಮಾಡಿ, ಸಂಸ್ಥೆಗಳ ಬಗ್ಗೆ ಮಾಹಿತಿ ತಿಳಿದು, ಬೀದಿ ನಾಯಿಗಳ ಬಗ್ಗೆ ಮಾಹಿತಿ ಸಂಗ್ರಹಿಸಬೇಕು. ಆಸ್ಪತ್ರೆ, ರೈಲ್ವೇ ನಿಲ್ದಾಣ, ಬಸ್ ನಿಲ್ದಾಣ ಹಾಗೂ ಕ್ರೀಡಾ ತರಬೇತಿ ಕೇಂದ್ರಗಳಲ್ಲಿ ಬೀದಿ ನಾಯಿಗಳ ಮಾಹಿತಿ ಪಡೆಯುವುದು ಸೇರಿದಂತೆ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಯಿತು.
ಈ ಸಭೆಯಲ್ಲಿ, ನಗರ ಪಾಲಿಕೆಯ ವ್ಯಾಪ್ತಿಯಲ್ಲಿರುವ ನಾಯಿಗಳ ನಿಖರ ಸಂಖ್ಯೆ, ಸ್ಥಳ ಹಾಗೂ ಅವುಗಳ ಆರೋಗ್ಯ ಸ್ಥಿತಿಯ ಮಾಹಿತಿಯನ್ನು ಸಂಗ್ರಹಿಸುವುದು, ಆರೋಗ್ಯ, ಶಿಕ್ಷಣ, ಸಾರಿಗೆ, ಯೋಜನೆ ಹಾಗೂ ರೈಲ್ವೇ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಲು ಒಬ್ಬ ನೋಡಲ್ ಅಧಿಕಾರಿಯನ್ನು ನೇಮಿಸುವಂತೆ ಸಂಸ್ಥೆಗಳಿಗೆ ಕೋರುವುದು, ಸದರಿ ಸಂಸ್ಥೆಗಳಿಂದ ನೇಮಿಸಲಾದ ನೋಡಲ್ ಅಧಿಕಾರಿಗಳ ಮಾಹಿತಿಯನ್ನು ಸಂಸ್ಥೆಯ ಪ್ರವೇಶ ದ್ವಾರದಲ್ಲಿ ನಮೂದಿಸಲು ಕ್ರಮ ಕೈಗೊಳ್ಳುವುದು, ಅಪಾಯಕಾರಿ ನಾಯಿಗಳನ್ನು ಹಿಡಿಯಲು ಅಭಿಯಾನ ಕೈಗೊಂಡು, ಬೀದಿ ನಾಯಿಗಳ ಸಂತಾನ ಹರಣ ಶಸ್ತ್ರಚಿಕಿತ್ಸೆ ಮತ್ತು ಆರೈಕೆಗೆ ಅಗತ್ಯ ಕ್ರಮ ಕೈಗೊಳ್ಳ ತಕ್ಕದ್ದು ಹಾಗೂ ಇತ್ಯಾದಿ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಅಲ್ಲದೇ ನಗರ ಪಾಲಿಕೆ ವ್ಯಾಪ್ತಿಯಿಂದ ಹೊರ ಪ್ರದೇಶದಲ್ಲಿ ಬೀದಿ ನಾಯಿಗಳ ಆಶ್ರಯ ತಾಣ ಮತ್ತು ನಿರ್ವಹಣೆಗೆ ಸೂಕ್ತ ಸ್ಥಳ ಪರಿಶೀಲನೆ ಮಾಡುವುದು ಹಾಗೂ ಬೀದಿನಾಯಿಗಳ ಹಾವಳಿಯನ್ನು ತಪ್ಪಿಸಲು ಅಗತ್ಯ ಬೇಲಿ, ಕಾಂಪೌಂಡ್ ಗೋಡೆಗಳು, ಗೇಟ್ಗಳು ಹಾಗೂ ಇನ್ನಿತರೆ ಅವಶ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರುವ ಬಗ್ಗೆ ಪರಿಶೀಲಿಸಿಕೊಳ್ಳತಕ್ಕದ್ದು ಎಂದು ಸೂಚಿಸಲಾಯಿತು.
ಇದನ್ನೂ ಓದಿ :Warning : ಸಮೀರ್ ಆಚಾರ್ಯ ಪತ್ನಿ ಶ್ರಾವಣಿಗೆ ಸಾರಿಗೆ ಇಲಾಖೆಯಿಂದ ಖಡಕ್ ವಾರ್ನಿಂಗ್…!
……..
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/Bd7Ce8dJBm0?si=PVqCd6an2dgXSUwk











